*ರಾಜ್ಯದ ಹೆಸರು ಬೆಳೆಗಾರರಿಗೆ ಕೇಂದ್ರದಿಂದ ಬಂಪರ್ ಕೊಡುಗೆ*
ಹೊಸದಿಲ್ಲಿ: ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಕೇಂದ್ರ ಆಹಾರ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
2024-25ರ ಖಾರೀಫ್ ಋತುವಿನಲ್ಲಿ ಬೆಂಬಲ ಬೆಲೆಯಲ್ಲಿ ಒಟ್ಟು 38,320 ಮೆಟ್ರಿಕ್ ಟನ್ ಹೆಸರು ಕಾಳು ಖರೀದಿಗೆ ಅವಕಾಶ ಕಲ್ಪಿಸುವ ಮೂಲಕ ಕೇಂದ್ರ ಸರ್ಕಾರ, ರಾಜ್ಯದಲ್ಲಿನ ಹೆಸರು ಬೆಳೆಗಾರರಿಗೆ ಬಂಪರ್ ಕೊಡುಗೆ ನೀಡಿದೆ ಎಂದಿದ್ದಾರೆ.
ರಾಜ್ಯದಲ್ಲಿ ಹೆಸರು ಬೆಳೆಗಾರರು ಸಂಕಷ್ಟದಲ್ಲಿದ್ದು, ಬೆಂಬಲ ಬೆಲೆಯಲ್ಲಿ ಖರೀದಿ ಹೆಚ್ಚಿಸುವಂತೆ ಪ್ರಧಾನಿ ಮೋದಿ ಅವರನ್ನು ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಲ್ಲಿ ಮನವಿ ಮಾಡಿದ್ದೆ. ತಮ್ಮ ಮನವಿಗೆ ತ್ವರಿತ ಸ್ಪಂದನೆ ನೀಡಿ ಹೆಸರು ಕಾಳು ಖರೀದಿ ಹೆಚ್ಚಿಸಲಾಗಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಈ ಮೊದಲು 22215 ಮೆಟ್ರಿಕ್ ಟನ್ ಹೆಸರು ಕಾಳು ಖರೀದಿಗೆ ಸೂಚಿಸಿತ್ತು. ಇದನ್ನು 38,320 ಮೆ.ಟನ್ ಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ರಾಜ್ಯದ ಹೆಸರು ಬೆಳೆಗಾರರಿಗೆ ಹೆಚ್ಚು ಅನುಕೂಲವಾಗಲಿದೆ ಎಂದಿದ್ದಾರೆ ಸಚಿವರು.
*ತ್ವರಿತ ಖರೀದಿಗೆ ಸೂಚನೆ:* ರಾಜ್ಯ ಸರ್ಕಾರ ಮತ್ತು ಕೇಂದ್ರದ ನೋಡಲ್ ಏಜೆನ್ಸಿಗಳು ಈ ಕೂಡಲೇ ರಾಜ್ಯಾದ್ಯಂತ ಹೆಸರು ಕಾಳು ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು ಮತ್ತು ತ್ವರಿತವಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಜೋಶಿ ಸೂಚಿಸಿದ್ದಾರೆ.