*ಮಾ.31ರೊಳಗೆ ಬರೆದಿದ್ದರೆ ಕಾನೂನು ಸಮರ*/ *ಹಲವುಮನವಿಗೂ ಸಿಗದ ಸ್ಪಂದನೆ*
ಹುಬ್ಬಳ್ಳಿ: ರಾಜ್ಯದ ಎರಡನೇ ಅತಿ ದೊಡ್ಡ ಮಹಾನಗರ ಪಾಲಿಕೆ ಹಿರಿಮೆಯ ಹುಬ್ಬಳ್ಳಿ-ಧಾರವಾಡ ಪಾಲಿಕೆ ನೌಕರರಿಗೆ ಸರ್ಕಾರದಿಂದ ಬರಬೇಕಿದ್ದ 21ಕೋಟಿ ರೂ. ವೇತನಾನುದಾನ ಕಳೆದ ಮೂರು ತಿಂಗಳಿನಿಂದ ಬಂದಿಲ್ಲವಾಗಿದ್ದು
ಇನ್ನೊಂದು ತಿಂಗಳಲ್ಲಿ ಮಹಾನಗರ ಪಾಲಿಕೆಯನ್ನು ಮುಚ್ಚುವ ಪರಿಸ್ಥಿತಿ ಬರಲಿದೆ.
ಹೌದು,ಹೀಗೆಂದು ಇಂದು ಪಾಲಿಕೆಯ ಆಡಳಿತಾರೂಢ ಬಿಜೆಪಿಯ ಸಭಾ ನಾಯಕ ವೀರಣ್ಣ ಸವಡಿ ಪತ್ರಿಕಾಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದರು.
ಖಾಯಂ ಪೌರಕಾರ್ಮಿಕರಿಂದ ಹಿಡಿದು ಆಯುಕ್ತರಿಗೂ ಸರ್ಕಾರವೇ ವೇತನ ನೀಡುತ್ತಿತ್ತು. ಆದರೆ, ಕಳೆದ ಮೂರು ತಿಂಗಳಿನಿಂದ ವೇತನಾನುದಾನ ಬಿಡುಗಡೆ ಆಗಿಲ್ಲ. ಇದನ್ನು ಪ್ರಶ್ನಿಸಿ ಪಾಲಿಕೆಯಿಂದ ಪತ್ರಬರೆದಿದ್ದು, ಪಾಲಿಕೆಯ ಸಾಮಾನ್ಯ ನಿಧಿಯಿಂದ ವೇತನ ನೀಡುವಂತೆ ಸರ್ಕಾರ ಉತ್ತರ ನೀಡಿದೆ ಎಂದು ಹೇಳಿದರು.
15ನೇ ಹಣಕಾಸು, ಎಸ್ಎಫ್ಸಿ ಮುಕ್ತನಿಧಿ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ,ಪಿಂಚಣಿ ಬಾಕಿ, ಅಮೃತ ಯೋಜನೆ ಸೇರಿ 290ಕೋಟಿ ರೂ. ಅನುದಾನ ಸರ್ಕಾರದಿಂದ ಬರಬೇಕಿದೆ.
ಇದರೊಟ್ಟಿಗೆ 6ನೇ ವೇತನ ಮತ್ತು 7 ನೇ ವೇತನದ ವ್ಯತ್ಯಾಸ ಮೊತ್ತವೂ ಪಾಲಿಕೆಗೆಬರಬೇಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್,
ಕಾರ್ಯದರ್ಶಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ಸಿಕ್ಕಿಲ್ಲ. ಸ್ವತಃ ಆಯುಕ್ತರೇ ಸಂತೋಷ್ ಲಾಡ್ ಅವರಿಗೆ ಕರೆ ಮಾಡಿ ಪಾಲಿಕೆಯ ಹಣಕಾಸಿನ ಸ್ಥಿತಿಗಳನ್ನು
ವಿವರಿಸಿದರೂ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.
ಪಾಲಿಕೆಯಲ್ಲಿ ಚುನಾಯಿತರ ಅಧಿಕಾರ ಇಲ್ಲದ ಎರಡೂವರೆ ವರ್ಷ ಅವಧಿಯಲ್ಲಿ ಶಾಸಕರು ಬೇಕಾಬಿಟ್ಟಿಯಾಗಿ ಪಾಲಿಕೆಯ ಸಾಮಾನ್ಯ ನಿಧಿಯನ್ನು ಬಳಸಿಕೊಂಡಿದ್ದಾರೆ. ಚುನಾಯಿತರ ಆಡಳಿತ ಅಸ್ತಿತ್ವಕ್ಕೆ ಬಂದ ಬಳಿಕವೂ ಈ ಪದ್ಧತಿ ರೂಢಿಯಲ್ಲಿದೆ. ಹೀಗಾಗಿ ಪಾಲಿಕೆಯ ಸಾಮಾನ್ಯನಿಧಿ ಕರಗಿದೆ. ಪಾಲಿಕೆಗೆ ನ್ಯಾಯಯುತವಾಗಿ ಬರಬೇಕಾದ ಅನುದಾನ ಮಾ.31 ರೊಳಗೆ
ಬಾರದಿದ್ದರೆ ಕಾನೂನು ಸಮರಕ್ಕೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.
ಮೇಯರ್ ಹಾಗೂ ಸದಸ್ಯರು ಎರಡು ವರ್ಷದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸರ್ಕಾರದ ನಡೆ ಖಂಡಿಸಿ ಸರ್ವ ಪಕ್ಷದ ಸದಸ್ಯರು ರಾಜ್ಯಪಾಲರ
ಭೇಟಿಯಾಗಿ ಮನವಿ ಸಲ್ಲಿಸುವುದಾಗಿ ಎಂದು ಪಾಲಿಕೆ ಸದಸ್ಯರೂ ಆಗಿರುವ ಬಿಜೆಪಿ ಮಹಾನಗರ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಕಿಡಿ ಕಾರಿದರು. ಮಾಜಿ ಮೇಯರ್ ಶಿವು ಹಿರೇಮಠ ಗೋಷ್ಠಿಯಲ್ಲಿದ್ದರು.