*ಐಪಿಎಲ್ ಕಪ್ ಸಂತಸದ ವೇಳೆ ಸೂತಕದ ಛಾಯೆ*
ಬೆಂಗಳೂರು :ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಕಿರೀಟ ಮುಡಿಗೇರಿಸಿಕೊಂಡ
ಬೆನ್ನಲ್ಲೇ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರಾದವರ ಸಂಖ್ಯೆ ಹತ್ತಕ್ಕೆ ಏರಿದೆ.
ವಿಜಯೋತ್ಸವದ ಸಂಭ್ರಮದಲ್ಲಿ ಉಂಟಾದ ಭಾರೀ ಜನಸಂದಣಿಯಿಂದಾಗಿ ಕಾಲ್ತುಳಿತ ಸಂಭವಿಸಿ ಆರು ಜನ ಪುರುಷರು , ನಾಲ್ವರು ಹೆಣ್ಣುಮಕ್ಕಳು ಮೃತ ಪಟ್ಟಿದ್ದಾರೆ. ಇಪ್ಪತ್ತಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದು, ಏಳು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಹದಿನೆಂಟು ವರ್ಷಗಳ ಐಪಿಎಲ್ ಟ್ರೋಫಿಯನ್ನು ಮೊದಲ ಬಾರಿಗೆ ಗೆದ್ದ ಆರ್ಸಿಬಿ ತಂಡದ ವಿಜಯೋತ್ಸವದಲ್ಲಿ ಮತ್ತು ಆಟಗಾರರನ್ನು ಹತ್ತಿರದಿಂದ ವೀಕ್ಷಿಸಲು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲ ಪ್ರದೇಶ ಮತ್ತು ರಸ್ತೆಗಳಲ್ಲಿ ಜಮಾಯಿಸಿದ್ದರು. ಜನರ ಅನಿರೀಕ್ಷಿತ ದಟ್ಟಣೆಯಿಂದಾಗಿ ಜನಸಂದಣಿಯ ನಿಯಂತ್ರಣ ತಪ್ಪಿದ್ದು, ಕೆಲವೆಡೆ ನೂಕುನುಗ್ಗಲು ಉಂಟಾಗಿ ಒಬ್ಬರ ಮೇಲೊಬ್ಬರು ಬಿದ್ದು ಕಾಲ್ತುಳಿತ ಸಂಭವಿಸಿದೆ.
ಬೌರಿಂಗ್ ಆಸ್ಪತ್ರೆಯಲ್ಲಿ ಆರು ಜನರ ಮೃತ ದೇಹಗಳಿದ್ದು, ವೈದೇಹಿ ಆಸ್ಪತ್ರೆಯಲ್ಲಿ ನಾಲ್ವರ ಮೃತದೇಹಗಳಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.
ಅಭಿಮಾನಿಗಳ ಹುಚ್ಚು ಅಭಿಮಾನದಿಂದ ಈ ಅವಘಡ ಸಂಭವಿಸಿದ್ದು ಕಾಲ್ತುಳಿತದ ಬಗ್ಗೆ ಗೃಹ ಸಚಿವ ಡಾ.ಪರಮೇಶ್ವರ ಮುಖ್ಯಮಂತ್ರಿಗಳಿಗೆ ವಿವರಿಸಿದ್ದು, ಸ್ವತಃ ಸಿಎಂ ಸಿದ್ದರಾಮಯ್ಯ ಬೌರಿಂಗ್ ಆಸ್ಪತ್ರೆಗೆ ಭೆಟ್ಟಿ ನೀಡಿದ್ದಾರೆ.