*ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ / ಧಾರವಾಡ ಕೇಸ್ ಎಫ್ಐಆರ್ ದಾಖಲು : ಲಾಡ್ / ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶ*
ಬೆಂಗಳೂರು : ಸಿ. ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ, 2023 ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಹೀಗೆ ಹೇಳಿದರು.
ರೋಹಿತ್ ವೆಮುಲಾ ಕಾಯ್ದೆಯ ಬಗ್ಗೆ ಕೇಳಿದಾಗ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಇನ್ನೊಂದೆಡೆ ಧಾರವಾಡದಲ್ಲಿ ನಡೆದ ಜನಿವಾರ ಕತ್ತರಿಸಿದ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ . ಈ ಸಂಬಂಧ ಎಫ್ಐಆರ್ ಕೂಡ ದಾಖಲಿಸಿಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ನಾವು ಆಧುನಿಕ ಯುಗದಲ್ಲಿದ್ದೇವೆ . ಇದೊಂದು ಗಂಭೀರ ವಿಷಯ . ಯಾರು ಜನಿವಾರ ಕತ್ತರಿಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ . ಈ ಬಗ್ಗೆ ಪೊಲೀಸ್ ಇಲಾಖೆ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತದೆ . ಜಿಲ್ಲಾಡಳಿತಕ್ಕೂ ಈಗಾಗಲೇ ಸೂಚಿಸಲಾಗಿದೆ ಎಂದರು.
*ವ್ಯಾಪಕ ಆಕ್ರೋಶ* : ಜನಿವಾರ ಕತ್ತರಿಸಿದ ಘಟನೆಗೆ ಬ್ರಾಹ್ಮಣ ಸಮಾಜ ಹಾಗೂ ವಿವಿಧ ಸಂಘಟನೆಗಳಿಂದ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಧಾರವಾಡದ ವಿದ್ಯಾರ್ಥಿ ನಂದನ ಏರಿ ಪ್ರಕರಣದ ಹಿನ್ನೆಲೆಯಲ್ಲಿ ಎಕೆ ಬಿಎಂಎಸ್ ನೇತೃತ್ವದಲ್ಲಿ ರವಿವಾರ
ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿದರೆ, ಇಂದೂ ಧಾರವಾಡ ತಾಲೂಕು ಬ್ರಾಹ್ಮಣ ಸಂಘ ಬೃಹತ್ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.
ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಕಾವು ತಾರಕಕ್ಕೆ ಏರುತ್ತಿದೆ.