*ಮೋದಿ ನೇತೃತ್ವದಲ್ಲಿ ನಡೆದ ಸಿಸಿಎಸ್ ಸಭೆಯಲ್ಲಿ ನಿರ್ಧಾರ*
ಹೊಸದಿಲ್ಲಿ : ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ನರಮೇಧದ ಹಿನ್ನೆಲೆಯಲ್ಲಿ ಭದ್ರತೆಯ ಕುರಿತಾದ ಸಂಪುಟ ಸಮಿತಿ (CCS) ಇಂದು ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಸಮರಕ್ಕೆ ಮುಂದಾಗಿದ್ದು ಅನೇಕ ಕಠಿಣ ಕ್ರಮ ತೆಗೆದುಕೊಂಡಿದೆ.
ಮಂಗಳವಾರ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ವಿದೇಶಿ ಪ್ರಜೆ ಸೇರಿದಂತೆ 26 ಜನರು ಮೃತರಾಗಿದ್ದು, ಈ ಹಿನ್ನೆಲೆಯಲ್ಲಿ ಪಾಕಿಸ್ತಾನವನ್ನು ಚೆಕ್ಮೇಟ್ ಮಾಡಲು ಅದರೊಂದಿಗಿನ ದಶಕಗಳಷ್ಟು ಹಳೆಯದಾದ ಸಿಂಧೂ ಜಲ ಒಪ್ಪಂದವನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸುವ
ನಿರ್ಧಾರ ಕೈಗೊಂಡಿದೆ. ಇದರೊಂದಿಗೆ, ಸಿಂಧೂ ನದಿ ಮತ್ತು ಉಪನದಿಗಳಾದ ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲುಜ್ಗಳಿಂದ ಪಾಕಿಸ್ತಾನಕ್ಕೆ ನೀರು ಸರಬರಾಜು ನಿಲ್ಲುತ್ತದೆ.
ಅಟ್ಟಾರಿ ಗಡಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಿದ್ದು. ಮಾನ್ಯತೆ ಪಡೆದ ಅನುಮೋದನೆಗಳೊಂದಿಗೆ ಭಾರತಕ್ಕೆ ದಾಟಿ ಬಂದವರು ಮೇ 01, 2025 ರ ಮೊದಲು ಆ ಮಾರ್ಗದ ಮೂಲಕ ಪಾಕಿಸ್ತಾನಕ್ಕೆ ಹಿಂತಿರುಗಬಹುದು.
ಪಾಕಿಸ್ತಾನಿ ಪ್ರಜೆಗಳಿಗೆ ಸಾರ್ಕ್ ವೀಸಾ ವಿನಾಯಿತಿ ಯೋಜನೆ ವೀಸಾಗಳ ಅಡಿಯಲ್ಲಿ ಭಾರತಕ್ಕೆ ಪ್ರಯಾಣಿಸಲು ಅನುಮತಿ ಇರುವುದಿಲ್ಲ.ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆ ಭಾರತವನ್ನು ಬಿಡಲು 48 ಗಂಟೆಗಳ ಕಾಲಾವಕಾಶವಿದೆ.
ದಿಲ್ಲಿಯಲ್ಲಿಪ ಪಾಕಿಸ್ತಾನಿ ಹೈಕಮಿಷನ್ನಲ್ಲಿರುವ ರಕ್ಷಣಾ/ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಪರ್ಸೋನಾ ನಾನ್ ಗ್ರಾಟಾ ಎಂದು ಘೋಷಿಸಲಾಗಿದೆ. ಅವರು ಭಾರತ ತೊರೆಯಲು ಒಂದು ವಾರದ ಕಾಲಾವಕಾಶವಿದೆ. ಭಾರತವು ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಹೈಕಮಿಷನ್ನಿಂದ ತನ್ನದೇ ಆದ ರಕ್ಷಣಾ/ನೌಕಾಪಡೆ/ವಾಯು ಸಲಹೆಗಾರರನ್ನು ಹಿಂತೆಗೆದುಕೊಳ್ಳಲಿದೆ. ಆಯಾ ಹೈಕಮಿಷನ್ಗಳಲ್ಲಿನ ಈ ಹುದ್ದೆಗಳನ್ನು ರದ್ದುಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.