ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ
ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ನಾಲ್ವರ ಮೇಲೆ ಗೂಂಡಾ ಕಾಯ್ದೆ ದಾಖಲಿಸಲಾಗಿದೆಯಲ್ಲದೆ, 31 ಆರೋಪಿಗಳನ್ನು ಗಡಿಪಾರು ಮಾಡಲಾಗಿದೆ.
ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ ಲಕ್ಕುಂಡಿ, ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ (ಸೈಂಟಿಸ್ಟ್ ಮಂಜ್ಯಾ), ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ದಾವೂದ್ ನದಾಫ ಹಾಗೂ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಣ ಗಭ್ಯಾ ಎಂಬುವರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿ ಕ್ರಮವಾಗಿ ಧಾರವಾಡ , ಕಲಬುರ್ಗಿ, ಮೈಸೂರು, ಹಾಗೂ ಬಳ್ಳಾರಿ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದರು.
ಹು-ಧಾ. ಕಮೀಶನರೇಟ್ ವ್ಯಾಪ್ತಿಯಲ್ಲಿ 1700ಕ್ಕೂ ಹೆಚ್ಚು ರೌಡಿಶೀಟರ್ಗಳಿದ್ದಾರೆ. ಅದರಲ್ಲಿ ಈ ಹಿಂದೆ 52 ಆರೋಪಿಗಳನ್ನು ಗಡಿಪಾರು ಮಾಡಲಾಗಿತ್ತು. ಈಗ 31 ಜನ ಸೇರಿ ಒಟ್ಟು 83 ಜನರ ಗಡಿಪಾರು ಮಾಡಿದಂತಾಗಿದೆ.ಇನ್ನೂ ಕೆಲವರ ಪಟ್ಟಿ ಮಾಡಿ ಮೂರನೇ ಹಂತದಲ್ಲಿ ಮತ್ತಷ್ಟು ಜನರ ಗಡಿಪಾರು ಮಾಡಲಾಗುವುದು ಎಂದು ತಿಳಿಸಿದರು.