*ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಆರು ವರ್ಷಗಳ ಕಾಲ ಉಚ್ಛಾಟನೆ*
ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಹಾಗೂ ಯಲ್ಲಾಪುರ ಮುಂಡಗೋಡ ಕ್ಷೇತ್ರದ ಶಾಸಕ ಅರಬೈಲು ಶಿವರಾಮ್ ಹೆಬ್ಬಾರ್ ಅವರನ್ನು ಭಾರತೀಯ ಜನತಾ ಪಕ್ಷದಿಂದ ಉಚ್ಛಾಟಿಸಲಾಗಿದೆ.ಇಬ್ಬರೂ ಶಾಸಕರನ್ನು 6 ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಿ ಬಿಜೆಪಿ ವರಿಷ್ಠರು ಆದೇಶ ಹೊರಡಿಸಿದ್ದಾರೆ.
ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಛಾಟನೆಯ ನಂತರ ಸೋಮಶೇಖರ ಹಾಗೂ ಹೆಬ್ಬಾರ್ ಅವರ ಉಚ್ಛಾಟನೆ ಯಾವಾಗ ಎಂಬ ಪ್ರಶ್ನೆಗಳು ಎದ್ದಿದ್ದವು. ಈಗ ಕೊನೆಗೂ ಕೇಸರಿ ಕಮಾಂಡ್ ಕ್ರಮ ತೆಗೆದುಕೊಂಡಿದೆ.
ಇಬ್ಬರೂ ಶಾಸಕರೂ ಕಾಂಗ್ರೆಸ್ ಮೂಲದವರಾಗಿದ್ದು , ಕಳೆದ ಅವಧಿಯಲ್ಲಿ ಕುಮಾರಸ್ವಾಮಿ ಸರ್ಕಾರವನ್ನು ಕೆಡವಿ ಬಿಜೆಪಿಗೆ ಸೇರ್ಪಡೆಯಾಗಿ ಗೆದ್ದು ಮಂತ್ರಿ ಪಟ್ಟ ಅಲಂಕರಿಸಿದ್ದರು.ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದರೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಕ್ಷದಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ನಾಯಕರ ಪರವಾಗಿ ಮಾತನಾಡುತ್ತಿದ್ದರು. ಬಿಜೆಪಿಯ ಚಟುವಟಿಕೆಯಿಂದ ದೂರವೇ ಇದ್ದರು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಎಷ್ಟೇ ಎಚ್ಚರಿಕೆ ನೀಡಿದರೂ ತಮ್ಮ ನಡೆಯನ್ನು ತಿದ್ದಿಕೊಳ್ಳದ ಹಿನ್ನೆಲೆಯಲ್ಲಿ ಇದೀಗ ಇಬ್ಬರನ್ನೂ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇವರಿಬ್ಬರೂ ಪಕ್ಷ ವಿರೋಧಿ ಕೆಲಸ ಮಾಡಿದ್ದರು. ಕೇಂದ್ರಕ್ಕೆ ಮನವಿ ಮಾಡಿದ್ದೆವು. ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದೆವು. ಇದೀಗ ಕೇಂದ್ರದಿಂದ ಉಚ್ಚಾಟನೆ ಮಾಡಲಾಗಿದೆ ಎಂದಿದ್ದಾರೆ.
ಯಲ್ಲಾಪುರ ಶಾಸಕ ಹೆಬ್ಬಾರ್ಪಕಷದ ನಿರ್ಧಾರ ಸ್ವಾಗತಿಸಿದ್ದಾರಲ್ಲದೇ ಯಾವ ಕಾರಣಕ್ಕೆ ತಾವು ದೂರ ಉಳಿದ ಕುರಿತು ಶೀಘ್ರ ಎಲ್ಲಾ ವಿವರ ಬಹಿರಂಗಪಡಿಸುವದಾಗಿ ಹೇಳಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಹುಬ್ಬಳ್ಳಿಯ ಲಿಂಗರಾಜ ಪಾಟೀಲ ಅವರು, ‘ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೇಂದ್ರ ಸಮಿತಿಗೆ ವರದಿ ನೀಡಲಾಗಿತ್ತು . ಈಗ ರಾಷ್ಟ್ರ ನಾಯಕರು ಎಲ್ಲ ಗೊಂದಲಕ್ಕೂ ಅಂತ್ಯ ಹಾಡಿದ್ದಾರೆ. ಸೂಕ್ತ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಕನ್ನಡ ಧ್ವನಿಗೆ ಹೇಳಿದರು.