ಬೆಂಗಳೂರು: *“ಇರಬೇಕು ಇರುವಂತೆ ತೊರೆದು ಸಾವಿರ ಚಿಂತೆ , ಮಳೆ ಸುರಿಸಿ ಹಗುರಾದ ಮುಗಿಲಿನಂತೆ”* ಮುಂತಾದ ನೂರಾರು ಅರ್ಥಪೂರ್ಣ ಭಾವಗೀತೆಗಳ ಗಾರುಡಿಗ , ಕಲಬುರಗಿಯಲ್ಲಿ ನಡೆದ 85ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ನಾಡಿನ ಹಿರಿಯ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ (80) ಅವರು ಇಂದು ನಿಧನರಾಗಿದ್ದಾರೆ.
ಕಳೆದ ಕೆಲದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನ್ಮ ತಾಳಿದ ವೆಂಕಟೇಶಮೂರ್ತಿ ಅವರು, 1973ರಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು.
ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿ ಮೊದಲಾದ ಪ್ರಕಾರಗಳಲ್ಲಿ ಅವರು ಸಾಹಿತ್ಯ ಕೃತಿಗಳನ್ನು ಸೃಷ್ಟಿಸಿದ್ದಾರೆ.ಕ್ರಿಯಾಪರ್ವ, ಒಣಮರದ ಗಿಳಿಗಳು, ಎಷ್ಟೊಂದು ಮುಗಿಲು, ಅಮೆರಿಕಾದಲ್ಲಿ ಬಿಲ್ಲುಹಬ್ಬ, ನದಿತೀರದಲ್ಲಿ, ಉತ್ತರಾಯಣ ಮತ್ತು ಕನ್ನಡಿಯ ಸೂರ್ಯ, ವೈದೇಹಿ ಮತ್ತು ಇತರ ಕವನಗಳು ಮೊದಲಾದುವು ಇವರ ಮುಖ್ಯ ಕಾವ್ಯಕೃತಿಗಳು. ಅಗ್ನಿವರ್ಣ, ಚಿತ್ರಪಟ, ಉರಿಯ ಉಯ್ಯಾಲೆ, ಮಂಥರೆ ಸೇರಿ ವಿವಿಧ ನಾಟಕಗಳು, ತಾಪಿ, ಅಮಾನುಷರು, ಕದಿರನಕೋಟೆ, ಅಗ್ನಿಮುಖಿ, ವೇದವತಿ ನದಿಯಲ್ಲ ಕಾದಂಬರಿಗಳನ್ನು ರಚಿಸಿದ್ದು ನೂರಾರು ಪ್ರಶಸ್ತಿಗಳು ಅರಸಿ ಬಂದಿವೆ.
ನಾಯಿ ತೇಲಿ ಮೇಲಿನ ಬುತ್ತಿ ಸಂಸಾರ, ಎಲ್ಲಿರುವಳೋ ನಲ್ಲೆ, ಹುಚ್ಚು ಕೋಡಿ ಮನಸು ಮುಂತಾದವು ವೆಂಕಟೇಶ್ ಮೂರ್ತಿ ಅವರ ಜನಪ್ರಿಯ ಹಾಡುಗಳಾಗಿದ್ದು, ಸಿ.ಅಶ್ವಥ್, ರಾಘವೇಂದ್ರ ಬೀಜಾಡಿ ಸೇರಿದಂತೆ ಪ್ರಸಿದ್ಧ ಗಾಯಕರು ಹಾಡಿದ್ದಾರೆ .