*ಎರಡೂ ನಿವಾಸಗಳೆದುರು ಮುಗಿಲು ಮುಟ್ಟಿದ ಆಕ್ರಂದನ*
ಬೆಂಗಳೂರು: ಪಹಲ್ಗಾಮ್ನಲ್ಲಿ ಪಾಪಿಗಳ ದಾಳಿಯಲ್ಲಿ ಮೃತರಾದ ಶಿವಮೊಗ್ಗದ ಮಂಜುನಾಥ ರಾವ್ ಮತ್ತು ಬೆಂಗಳೂರಿನ ಭರತ್ ಭೂಷಣ್ ಅವರ ಪಾರ್ಥಿವ ಶರೀರಗಳನ್ನು ವಿಮಾನದ ಮೂಲಕ ಬೆಂಗಳೂರಿಗೆ ಕರೆ ತಂದು ಅವರ ನಿವಾಸಿಗಳಿಗೆ ಕಳುಹಿಸಲಾಗಿದೆ.
ಇಂದು ಬೆಳಿಗ್ಗೆ ಆಗಮಿಸಿದ ಮಂಜುನಾಥ ರಾವ್ ಪಾರ್ಥಿವ ಶರೀರವನ್ನು ಆಂಬುಲೆನ್ಸ್ನಲ್ಲಿ ಶಿವಮೊಗ್ಗಕ್ಕೆ ಕಳುಹಿಸಲಾಯಿತು.
ಈ ವೇಳೆ ಅವರ ಕುಟುಂಬದವರು ಹಾಜರಿದ್ದರು.
ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಕುಟುಂಬದವರ ಸಮ್ಮುಖದಲ್ಲಿ ಅಧಿಕಾರಿಗಳು ಭರತ್ ಅವರ ಮತ್ತಿಕೆರೆ ನಿವಾಸಕ್ಕೆ ಆಂಬುಲೆನ್ಸ್ನಲ್ಲಿ ತಲುಪಿಸಿದರು. ಭರತ್ ಅವರ ಮನೆಯಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಸಹಿತ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಂತರ ಮಾತನಾಡಿ ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹ್ಯೇಯಕೃತ್ಯ ಎಂದರು.
ಮಂಜುನಾಥ ರಾವ್ ಅವರು ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಜನರು, ಸಂಬಂಧಿಗಳು ಮಂಜುನಾಥ ರಾವ್ ಅವರ ನಿವಾಸದೆದುರು ಜಮಾಯಿಸಿದ್ದು ಇಡೀ ಶಿವಮೊಗ್ಗದಲ್ಲಿ ಸೂತಕದ ಛಾಯೆ ಮನೆ ಮಾಡಿದೆ.ಮೃತರ ಕುಟುಂಬದವರ ಜೊತೆ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಜೊತೆಯಾಗಿ ಬಂದಿದ್ದರು.
ಎರಡೂ ಕುಟುಂಬಗಳ ಒಟ್ಟು 13 ಮಂದಿ ಸದಸ್ಯರು ಇಂಡಿಗೊ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ತಮ್ಮ ಸ್ಥಳಗಳಿಗೆ ತೆರಳಿದ್ದಾರೆ.
ದಾಳಿಯಲ್ಲಿ ಮೃತಪಟ್ಟಿರುವ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಧುಸೂದನ್ ಸೋಮಿಶೆಟ್ಟಿ ರಾವ್ (44) ಅವರ ಮೃತದೇಹವನ್ನು ಆಂಧ್ರಪ್ರದೇಶದ ನೆಲ್ಲೂರಿಗೆ ತಲುಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಹಲ್ಗಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾಗಿರುವ ಮಂಜುನಾಥರಾವ್ ಹಾಗೂ ಭರತ್ ಭೂಷಣ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ
ತನ್ಮಧ್ಯೆ ಕೇಂದ್ರ ಸರ್ಕಾರ ಸಂಜೆ 6 ಗಂಟೆಗೆ ಸರ್ವ ಪಕ್ಷಗಳ ಸಭೆ ಕರೆಯಲಾಗಿದೆ.