*ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ವಯನಾಡಿಗೆ*
ಹುಬ್ಬಳ್ಳಿ : ಕೇರಳದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕಾರ್ಮಿಕ ಖಾತೆಯ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ತೆರಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಸಚಿವ ಸಂತೋಷ್ ಲಾಡ್ ಅವರು ತುರ್ತಾಗಿ ವಯನಾಡಿಗೆ ಪ್ರಯಾಣ ಬೆಳೆಸಿದ್ದಾರೆ.
ಈ ಹಿಂದೆ ಉತ್ತರಾಖಂಡದಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಮತ್ತು ಭೀಕರ ರೈಲು ದುರಂತದ ವೇಳೆ ಸಹ ಲಾಡ್ ಅವರು ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷಿತವಾಗಿ ಕರೆತಂದಿದ್ದರು.
ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ರಾಜ್ಯದಿಂದ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ.
ಹೊಸ ದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ಸೂಚನೆ ನೀಡಿದ್ದಾರೆ.
ಎಂಇಜಿ ಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ. ಗಳು ಹಾಗೂ 70 ಮಂದಿ ವಿವಿಧ ರ್ಯಾಂಕಿನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ.
ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ, ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಈ ಎನ್ ಡಿ ಆರ್ ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್ ಕಾರಿಡಾರ್ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.
ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ನೆರವು ಒದಗಿಸಲಾಗುತ್ತಿದೆ. ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ.
ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್ ಅಧಿಕಾರಿ ಪಿ.ಸಿ. ಜಾಫರ್ (ಮೊಬೈಲ್ ಸಂಖ್ಯೆ 9448355577) ಹಾಗೂ ದಿಲೀಶ್ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ.
*ಕನ್ನಡಿಗರ ರಕ್ಷಣೆಗೆ ಪ್ರಯತ್ನ*
ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.