*ನಾಳೆ ಸದನದಲ್ಲಿ 2ಎ ಕುರಿತ ಸುಪ್ರೀಂ ಆದೇಶ ಮಂಡನೆ : ಸಿಎಂ**/
*ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಹೋರಾಟ,ಬಿಜೆಪಿ ಬೆಂಬಲ*
ಬೆಳಗಾವಿ: ಇಂದಿನಿಂದ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು ನಾಳೆ ಪಂಚಮಸಾಲಿ ಬಿಸಿ ತಟ್ಟುವುದು ನಿಶ್ಚಿತವಾಗಿದೆ. 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಕೂಡಲಸಂಗಮ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಟಕ್ಕೆ ಸಜ್ಜಾಗಿದ್ದು,ಟ್ರ್ಯಾಕ್ಟರ್ ರ್ಯಾಲಿ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಘೋಷಿಸಿದ್ದಾರೆ.
ಬೆಳಗಾವಿ ಜಿಲ್ಲಾಡಳಿತ ಯಾವುದೇ ಮೆರವಣಿಗೆಗೆ ಅವಕಾಶವಿಲ್ಲವೆಂದು ಆದೇಶ ಹೊರಡಿಸಿದ್ದರ ವಿರುದ್ಧ ಕಿಡಿಕಾರಿರುವ ಸ್ವಾಮೀಜಿ, ಇದು ಹೋರಾಟವನ್ನು ಹತ್ತಿಕ್ಕುವ ಯತ್ನವಾಗಿದೆ. ಪಂಚಮಸಾಲಿ ಸಮುದಾಯದ ಹೋರಾಟ ಹತ್ತಿಕ್ಕಲು ಯತ್ನಿಸಿದರೆ ಸರ್ಕಾರ ಇನ್ನಷ್ಟು ಪ್ರತಿಭಟನೆ ಎದಿರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಟ್ರ್ಯಾಕ್ಟರ್ ರಾಲಿಗೆ ತಡೆಯೊಡ್ಡಿದರೆ ಕಾಲ್ನಡಿಗೆ ಮೂಲಕ ಸುವರ್ಣ ಸೌಧ ಮುತ್ತಿಗೆ ಹಾಕುತ್ತೇವೆ. ಒಂದು ವೇಳೆ ಅದಕ್ಕೂ ತಡೆ ನೀಡಿದರೆ ಸುವರ್ಣ ಸೌಧದ ಮುಂಭಾಗ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.
ಇನ್ನೊಂದೆಡೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿಯೋಗ, ವಿಪಕ್ಷ ನಾಯಕ ಆರ್.ಅಶೋಕ ಅವರು ಸ್ವಾಮೀಜಿ ಭೇಟಿಯಾಗಿ ಬೆಂಬಲ ವ್ಯಕ್ತಪಡಿಸಿದ್ದು ಸದನದಲ್ಲಿ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಸಹ ಪ್ರಸ್ತಾಪಿಸಿದ್ದಾರೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಪಂಚಮಸಾಲಿ ಬಾಂಧವರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪಾಲ್ಗೊಳ್ಳುವ ಪ್ರತಿಭಟನಾಕಾರರಿಗೆ ಊಟದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಹೇಳಿದರು.
ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದರು.
ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವAತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ. ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂರು ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಂರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊAಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುವದಾಗಿ ಸ್ಪಷ್ಟಪಡಿಸಿದರು.
ಶಾಸಕ ಅರವಿಂದ ಬೆಲ್ಲದ್ ಮಂಗಳವಾರ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಡೆಯಲಿದೆ. ಆದ್ದರಿಂದ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಬುಧವಾರ ಸದನದ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿಗಳಲ್ಲಿ ಸಭಾಧ್ಯಕ್ಷರ ಮೂಲಕ ಕೋರಿದರು.
*ಮಹತ್ವದ ಸುದ್ದಿಗಳು*
1)ಬೆಳಗಾವಿ ಸುವರ್ಣಸೌಧದ ವಿಧಾನಸಭೆಯ ಒಳಗೆ ವಿಶ್ವಗುರು ಬಸವಣ್ಣನವರ ಅನುಭವ ಮಂಟಪದ ತೈಲ ವರ್ಣ ಚಿತ್ರವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಇಂದು ಅನಾವರಣಗೊಳಿಸಿದರು.
2) ಉಪ ಸಮರದಲ್ಲಿ ಗೆದ್ದ ಮೂವರು ನೂತನ ಶಾಸಕರಾದ ಯಾಸೀರಖಾನ ಪಠಾಣ, ಸಿ.ಪಿ.ಯೋಗೇಶ್ವರ, ಅನ್ನಪೂರ್ಣ ತುಕಾರಾಂ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಪಠಾಣ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು.
3)ಭಾರತೀಯ ರಿಸರ್ವ ಬ್ಯಾಂಕಿನ ನೂತನ ಗವರ್ನರ್ ಆಗಿ ಇಂದು ಕೇಂದ್ರ ಕಂದಾಯ ಇಲಾಖೆ ಕಾರ್ಯದರ್ಶಿ ಸಂಜಯ ಮಲ್ಹೋತ್ರಾ ನೇಮಕಗೊಂಡಿದ್ದಾರೆ.
4)ರಾಜ್ಯದಲ್ಲಿ ಇದುವರೆಗೆ 1,45,978 ಪದವೀಧರರಿಗೆ ಯುವ ನಿಧಿ ಯೋಜನೆಯಡಿ ನೇರ ನಗದು ವರ್ಗಾವಣೆಯಾಗಿರುವ ಮಾಹಿತಿಯನ್ನು ಸಚಿವ ಡಾ.ಶರಣಪ್ರಕಾಶ ಪಾಟೀಲ ಇಂದು ಪರಿಷತ್ಗೆ ನೀಡಿದ್ದಾರೆ.
5)ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಲಿಕೆ ಸದಸ್ಯರು ಮಹಾನಗರ ಬಿಜೆಪಿ ಆಶ್ರಯದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.