*ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ದರಾಮಯ್ಯ ಸಹಿತ ಹಲವು ಸಚಿವರು ಭಾಗಿ*
ಗದಗ :ಸಹಕಾರ ರಂಗದಲ್ಲಿ ತಮ್ಮ ಛಾಪನ್ನು ಅಚ್ಚಳಿಯದ ಹಾಗೆ ಕೆಲಸ ನಿರ್ವಹಿಸಿ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿರುವ
‘ ಸಹಕಾರಿ ಭೀಷ್ಮ’ ಎಂದೇ ಕರೆಸಿಕೊಳ್ಳುವ ಕೆ.ಎಚ್. ಪಾಟೀಲರ ಜನ್ಮಶತಮಾನೋತ್ಸವ ಆಚರಣೆ ಮತ್ತು ದಿ. ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಮಾ. 16ರಂದು ಬೆಳಿಗ್ಗೆ 11ಕ್ಕೆ ಕೆ.ಎಚ್.ಪಾಟೀಲ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ಮಾಜಿ ಶಾಸಕ ಹಾಗೂ ಪ್ರತಿಷ್ಠಾನದ ಅಧ್ಯಕ್ಷ ಡಿ.ಆರ್. ಪಾಟೀಲ ಶುಕ್ರವಾರ (ಮಾ.14) ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು.
ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಕಾರ್ಯಕ್ರಮ ಜರುಗಲಿದ್ದು, ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಸಂಭ್ರಮದ ಕಾರ್ಯಕ್ರಮವನ್ನು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸುವರು. ಸೊಸೈಟಿ ನೂತನ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸುವರು ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಘನ ಉಪಸ್ಥಿತಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಹಾಗೂ ಕೋ-ಆಪರೇಟಿವ್ ಫೆಡರೇಶನ್ ಅಧ್ಯಕ್ಷ ಜಿ.ಟಿ. ದೇವೇಗೌಡ, ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ, ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್. ಶಂಕರ, ಕಾರ್ಮಿಕ ಸಚಿವ ಸಂತೋಷ ಲಾಡ್, ಜವಳಿ, ಎಪಿಎಂಸಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು ಎಂದರು.